ಗುಜರಾತ್ ಮಾಡೆಲ್ ಎಲ್ಲಿದೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ? ಡಿ.ಕೆ.ಶಿವಕುಮಾರ್ ಪ್ರಶ್ನೆ | ಜನತಾ ನ್ಯೂಸ್
ಬೆಂಗಳೂರು : ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಜಗದೀಶ್ ಶೆಟ್ಟರ್ ಗುಜರಾತ್ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುಜರಾತ್ಗೆ ಎಷ್ಟು ವ್ಯಾಕ್ಸಿನ್ ಕೊಟ್ಟಿದ್ದಾರೆ. ನಮಗೆ ಎಷ್ಟು ಕೊಟ್ಟಿದ್ದಾರೆ. ನಮಗೆ ಅದರಲ್ಲಿ ಶೇ.50ರಷ್ಟು ವ್ಯಾಕ್ಸಿನ್ ಕೊಟ್ಟಿಲ್ಲ. ಮೊದಲು ಇದರ ಬಗ್ಗೆ ಸಿಎಂ ಅವರು ಪ್ರಧಾನಿ ಬಳಿ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರದವರು ಅಧ್ಯಯನ ಮಾಡಲು ಗುಜರಾತಿಗೆ ಹೋಗಲಿ, ನಮ್ಮ ಅಭ್ಯಂತರವಿಲ್ಲ. ಅವರು ಯಾವ ಮಾಡೆಲ್ ಆದರೂ ನೀಡಲಿ. ಆದರೆ ನಮ್ಮ ಜನರಿಗೆ ನ್ಯಾಯ ಒದಗಿಸಲಿ, ಸರಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲಿ ಎಂದಿದ್ದಾರೆ.
ಕೋವಿಡ್ ನಿಂದ ಮೃತಪಟ್ಟವರಿಗೆ ಸಹಜ ಸಾವು ಎಂದು ಮರಣ ಪ್ರಮಾಣ ಪತ್ರ ನೀಡಲಾಗಿದೆ. ಇವರ ಮರಣ ಪ್ರಮಾಣ ಪತ್ರವನ್ನು ಹೇಗೆ ಮಾರ್ಪಾಡು ಮಾಡಲು ಆಗುತ್ತದೆ? ಕೋವಿಡ್ ನಿಂದ ತೊಂದರೆಗೆ ಒಳಗಾದವರಿಗೆ, ಸಾಂಪ್ರಾದಾಯಿಕ ವೃತ್ತಿ ಉಳಿಸಿಕೊಂಡು ಬಂದವರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಗುವ ಬಗ್ಗೆ ಯಾವುದೇ ಸ್ಪಷ್ಟತೆ, ಭರವಸೆ ಇಲ್ಲ ಎಂದು ಹೇಳಿದರು.
ಕೊರೊನಾದಿಂದ ಸಂಕಷ್ಟ ಎದುರಿಸಿದವರಿಗೆ ಪರಿಹಾರ ಕೊಡ್ತಿಲ್ಲ. ಆನ್ಲೈನ್ ನೋಂದಣಿ ರೈತರಿಗೆ ಬಡವರಿಗೆ ಗೊತ್ತಿದ್ದೀಯಾ? ಸರ್ಕಾರದ ಪರಿಹಾರ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. 1.5 ಕೋಟಿ ಜನ ಇದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರದಲ್ಲಿ ಈ ವರ್ಗದವರ ಲೆಕ್ಕ ಬೇರೆ ಇದೆ. ಹೀಗಾಗಿ ಇವರಿಗೆ ನ್ಯಾಯ ಒದಗಿಸಲು ಏನು ಮಾಡಬೇಕು ಎಂದು ನಮ್ಮ ನಾಯಕರ ಸಲಹೆ ಪಡೆಯಲು ಸಭೆ ಕರೆದಿದ್ದೆ. ಪ್ರತಿ ಕ್ಷೇತ್ರದ ನಾಯಕರ ಅಭಿಪ್ರಾಯ ಪಡೆದು, ನಮ್ಮ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.