ಸೋಮವಾರ ದಿಲ್ಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ: ಹೈಕಮಾಂಡ್ ಕರೆ | ಜನತಾ ನ್ಯೂಸ್
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಸೋಮವಾರ ಸಂಜೆ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ ಮಂಗಳವಾರ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಈ ಬಾರಿ ಭೇಟಿ ಸಂದರ್ಭ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಇತರ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚಿಸಲಿದ್ದಾರೆ ಎನ್ನಲಾಗಿದೆ.
ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಅವರು ತಮ್ಮ ಒಂದು ಪಟ್ಟಿಯನ್ನು ವರಿಷ್ಠರಿಗೆ ನೀಡಿ ಬಂದಿದ್ದರು. ಬಳಿಕ ಸಿದ್ದರಾಮಯ್ಯ ಕೂಡಾ ಒಂದು ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದರು ಎನ್ನಲಾಗಿದೆ. ಇದೀಗ ಇದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಕರೆ ಮಾಡಿದೆ ಎನ್ನಲಾಗಿದೆ.