ಯಡಿಯೂರಪ್ಪ ರಾಜೀನಾಮೆ: ಸಂಪೂರ್ಣ ಸ್ಥಬ್ಧವಾದ ಶಿಕಾರಿಪುರ, ಅಂಗಡಿಗಳು ಬಂದ್ | ಜನತಾ ನ್ಯೂಸ್
ಶಿವಮೊಗ್ಗ : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸುತ್ತಿದ್ದಂತೆ ಪಟ್ಟಣದಲ್ಲಿ ಯಡಿಯೂರಪ್ಪ ಅಭಿಮಾನಿಗಳು ಹಾಗೂ ವಾಣಿಜ್ಯ ಮಳಿಗೆಗಳ ಮಾಲೀಕರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿದರು. ಶಿಕಾರಿಪುರದ ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ರಸ್ತೆ ಸೇರಿದಂತೆ ವಿವಿದೆಡೆ ಇರುವ ಅಂಗಡಿಗಳನ್ನು ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿರುವ ಬಗ್ಗೆ ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತರು ಹೈಕಮಾಂಡ್ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರಿಗೆ ಮಾಡಿದ ಅನ್ಯಾಯವಲ್ಲ, ಜನ ಸಾಮಾನ್ಯರಿಗೆ ಮಾಡಿದ ಅನ್ಯಾಯವೆಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಪರ ಜೈಕಾರ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಮಾಳೇರಕೇರಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ನಿರವ ಮೌನ ಆವರಿಸಿತ್ತು.
ಕರ್ನಾಟಕದಲ್ಲಿ ಬಿಜೆಪಿ ಯಾರಿಗೂ ಗೊತ್ತಿರಲಿಲ್ಲ. ಯಡಿಯೂರಪ್ಪ ಹೋರಾಟ ಮೂಲಕ ಪಕ್ಷ ಕಟ್ಟಿದ್ದರು. ಈಗ ಕೇಂದ್ರದ ನಾಯಕರು ಅವರನ್ನೇ ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ಯಡಿಯೂರಪ್ಪ ಅವರು ಬೆಳೆಸಿದ ಮರದಿಂದ ಹಣ್ಣು ತಿನ್ನಲು ಹಲವರು ಕಾಯುತ್ತಿದ್ದಾರೆ. ಅವರ ಕುಟುಂಬ ಸದಸ್ಯರಿಗೇ ಮುಖ್ಯಮಂತ್ರಿ ಸ್ಥಾನ ಕೊಡಬೇಕು, ಇಲ್ಲದಿದ್ದರೆ ಬಿಜೆಪಿ ಕರ್ನಾಟಕದಲ್ಲಿ ಸರ್ವನಾಶವಾಗುತ್ತದೆ ಎಂದು ಬೂಕನಕೆರೆಯ ಮಧುಸೂದನ್ ಹೇಳಿದರು.