ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಎನ್.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷವನ್ನು ಪ್ರತಿನಿಧಿಸುವ ಕೇಸರಿ ಶಾಲು ಹೊದಿಸಿ ಎನ್.ಮಹೇಶ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.
ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದ್ದು, ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿಯವರಾದ ನರೇಂದ್ರ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು.
2018ರ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಮಹೇಶ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್ಪಿಯಿಂದ ಉಚ್ಚಾಟನೆಗೊಂಡಿದ್ದರು.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಎಸ್ಪಿ ರಾಜ್ಯದಲ್ಲಿ ಚುನಾವಣೆ ಎದುರಿಸಿತ್ತು. 71,792 ಮತಗಳನ್ನು ಪಡೆದು ಎನ್. ಮಹೇಶ್ ಗೆಲುವು ಸಾಧಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬಿಎಸ್ಪಿ ಅಭ್ಯರ್ಥಿಯೊಬ್ಬರು ಗೆದ್ದು ಶಾಸಕರಾಗಿದ್ದರು.