ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂಸ್
ಶಿವಮೊಗ್ಗ : ಸಿದ್ದರಾಮಯ್ಯ ಕೆಟ್ಟ ಕನಸುಗಾರ. ಎಲ್ಲರಿಗೂ ಒಳ್ಳೆಯ ಕನಸು ಬಿದ್ದರೆ ಸಿದ್ದರಾಮಯ್ಯ ಅವರಿಗೆ ಕೆಟ್ಟ ಕನಸು ಬೀಳುತ್ತದೆ. ಅವರ ಕನಸು ಈ ಜನ್ಮದಲ್ಲಿ ನನಸು ಆಗುವುದಿಲ್ಲ. ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ ಎಂದು ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಪುಟ ರಚನೆ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಂಪುಟ ರಚನೆಯ ಎಲ್ಲಾ ಗೊಂದಲ ಬಗೆಹರಿದಿದೆ. ಸಣ್ಣ ಪುಟ್ಟ ಗೊಂದಲಗಳನ್ನು ಪಕ್ಷದ ವರಿಷ್ಠರು ಬಗೆಹರಿಸಲಿದ್ದಾರೆ. ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಆಗಲಿದೆ. ನಾನು ಇಂತಹುದೇ ಖಾತೆ ಬೇಕು ಎಂದು ಕೇಳುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಕೆಟ್ಟ ಕನಸುಗಾರ. ಸರ್ಕಾರ ಬಿದ್ದು ಹೋಗುತ್ತದೆ, ನಾನು ಮತ್ತೆ ಸಿಎಂ ಆಗಬಹುದು ಎಂದು ಅವರು ಕನಸು ಕಂಡಿದ್ದರು. ಆದರೆ ಅದು ಹುಸಿಯಾಗಿದೆ, ಈ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಮತ್ತೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರುವುದಿಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ರೋಷನ್ ಬೇಗ್ ಹಾಗೂ ಶಾಸಕ ಜಮೀರ್ ಅಹ್ಮದ್ ಮನೆಗಳ ಮೇಲೆ ಐಟಿ-ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ಅವರ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿದೆ. ಅದು ಸುಖಾಸುಮ್ಮನೆ ಉದ್ದೇಶಪೂರ್ವಕವಾಗಿ ನಡೆದ ದಾಳಿ ಅಲ್ಲ.
ಬಡವರು, ಕೂಲಿ ಕಾರ್ಮಿಕರು, ಐಎಂಎನಲ್ಲಿ ಹಣ ಕಳೆದುಕೊಂಡಿದ್ದಾರೆ, ಅವರಿಗೆ ಶಾಪ ತಟ್ಟಲಿದೆ. ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಕೊಲೆ ಆರೋಪದ ಮೇರೆಗೆ ಬಂಧಿಸಿದಾಗಲೂ ಕಾಂಗ್ರೆಸ್ಸಿಗರು ಅದರಲ್ಲೂ ವಿಶೇಷವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೀಗೆ ಹೇಳಿದ್ದರು.
ನಂತರ ಏನಾಯಿತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹಾಗಾಗಿ ಜಮೀರ್ ಅಹ್ಮದ್ ಹಾಗೂ ರೋಷನ್ ಬೇಗ್ ಅವರು ಐಎಂಎ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಸಾಬೀತುಪಡಿಸಲಿ ಎಂದು ಸವಾಲೆಸೆದರು.